ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಸೂಚನೆ: ಎಂ.ಬಿ.ಪಾಟೀಲ
ಬೆಂಗಳೂರು:
ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಬಗ್ಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಂಬಂದಪಟ್ಟ ಎಲ್ಲ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಭೂಸ್ವಾಧೀನಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಯೋಜನೆಯಿಂದ 52,700 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಲ್ಲಿ 37,200 ಎಕರೆ ಜಮೀನು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲೇ ಇದೆ. ಈಗಾಗಲೇ ವಿತರಣಾ ಕಾಲುವೆ, ಉಪಕಾಲುವೆ, ಹೊಲಗಾಲುವೆ ಕಾಮಗಾರಿಗಳೆಲ್ಲ ಮುಗಿದು ನೀರು ಹರಿಯುತ್ತಿದೆ. ಇದರ ಪ್ರಯೋಜನ ರೈತರಿಗೂ ಆಗುತ್ತಿದೆ ಎಂದು ಹೇಳಿದರು.
ಈ ಯೋಜನೆಗೆ ಅಗತ್ಯ ಜಮೀನು ಬಿಟ್ಟುಕೊಡುವಂತೆ ರೈತರಿಗೆ ಮನವಿ ಮಾಡಿಕೊಂಡಿದ್ದೆ. ರೈತರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಅಂಥವರಿಗೆ ಈಗ ಪರಿಹಾರ ಹಣ ನೀಡಲು ಸಬೂಬು ಹೇಳುತ್ತಿರುವುದು ಸರಿಯಲ್ಲ. ಆದಷ್ಟು ಬೇಗ ಪ್ರಕ್ರಿಯೆ ಮುಗಿಯಬೇಕು ಎಂದು ಅವರು ಸೂಚಿಸಿದ್ದಾರೆ.
ಭೂಸ್ವಾಧೀನಾಧಿಕಾರಿ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇದೆ. ಇದನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಾಂತ್ರಿಕ ವಿಷಯಗಳ ನೆಪವೊಡ್ಡಿ ರೈತರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ರೇಗಿದರು.
ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮೀನ್ಬಾವಿ, ನಿಗಮದ ಮುಖ್ಯ ಆಡಳಿತಾಧಿಕಾರಿ ಔದರಂ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಸೂಪರಿಂಟೆಂಡೆಂಟ್ ಎಂಜಿನಿಯರ್ ಬಿ.ಎ.ನಾಗರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇಟ್ಟಿಗೆ ಕಾರ್ಮಿಕರ ಮೇಲೆ ಹಲ್ಲೆ ಘಟನೆ
ತಪ್ಪಿತಸ್ಥರ ಬಂಧನ: ಎಂ ಬಿ ಪಾಟೀಲ
ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಅಮಾನವೀಯವಾಗಿದೆ. ತಪ್ಪಿತಸ್ಥರನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮವನ್ನೂ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಘಟನೆಯ ಬಗ್ಗೆ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ವಿಧಾನಸೌಧದಲ್ಲಿ ಸೋಮವಾರ ಉತ್ತರಿಸಿದ್ದಾರೆ.
ಇಟ್ಟಿಗೆ ಭಟ್ಟಿಯಲ್ಲಿ ನಡೆದಿರುವ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠರ ಜತೆ ಮಾತನಾಡಿ, ಸೂಕ್ತ ಕ್ರಮ ಜರುಗಿಸಲು ಸೂಚಿಸಿದ್ದೇನೆ. ಅಲ್ಲಿನ ಜಿಲ್ಲಾಧಿಕಾರಿಗಳು ಕರ್ತವ್ಯದ ಮೇಲೆ ಬೆಂಗಳೂರಿನಲ್ಲೇ ಇದ್ದಾರೆ. ಅವರೊಂದಿಗೂ ಈ ಬಗ್ಗೆ ಮಾತನಾಡಿರುವೆ. ತಪ್ಪಿತಸ್ಥರನ್ನು ಹಾಗೆಯೇ ಬಿಡುವ ಪ್ರಶ್ನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಿಡ್ಕಲ್: ಕೇವಲ ಅರ್ಧ ಟಿಎಂಸಿ ನೀರು ಬಳಕೆ: ಎಂ ಬಿ ಪಾಟೀಲ
ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿರುವ ಹಿಡಕಲ್ ಅಣೆಕಟ್ಟೆಯಿಂದ ಪಕ್ಕದ ಹುಬ್ಬಳ್ಳಿ- ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ನಾವು ಬಳಸುತ್ತಿರುವುದು ಕೇವಲ 0.58 ಟಿಎಂಸಿ ಅಡಿ ನೀರಷ್ಟೆ. ಈ ವಿಚಾರದಲ್ಲಿ ವಿರೋಧ ಸರಿಯಲ್ಲ. ಕೈಗಾರಿಕೆಗಳು ಬೆಳೆಯಬೇಕು ಎಂದರೆ ನೀರನ್ನು ಕೊಡಬೇಕಾದ್ದು ಸರಕಾರದ ಮೂಲಭೂತ ಕರ್ತವ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 'ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ನ್ಯಾಯಾಧೀಕರಣ ತೀರ್ಪಿನಲ್ಲಿ ಕೈಗಾರಿಕಾ ಬೆಳವಣಿಗೆ ಸಲುವಾಗಿಯೇ ಹಿಡಕಲ್ ಜಲಾಶಯದಿಂದ 4 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ. ಇದರಲ್ಲಿ ನಾವು ಕೇವಲ ಪ್ರತಿ ನಿತ್ಯ 45 ದಶ ಲಕ್ಷ ಲೀಟರ್ (0.58 ಟಿಎಂಸಿ) ನೀರು ಮಾತ್ರ ಬಳಸಲು ತೀರ್ಮಾನಿಸಿದ್ದೇವೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ತೊಂದರೆ ಆಗುವಂಥ ಯಾವ ಅಂಶವೂ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
ಸರಕಾರವೇನೂ ಹಿಡಕಲ್ ಅಣೆಕಟ್ಟೆಯಿಂದ ನೀರು ಕೊಡಲು ಮುಂದಾಗಿಲ್ಲ. ಕೆಳಭಾಗದ ನದಿಯಿಂದ ಈ ನೀರನ್ನು ಹುಬ್ಬಳ್ಳಿ-ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ಪೂರೈಸುತ್ತೇವೆ. ನೆರೆಹೊರೆಯ ಜಿಲ್ಲೆಗಳ ಜನರ ನಡುವೆ ಪರಸ್ಪರ ಅನ್ಯೋನ್ಯತೆ ಇರಬೇಕು ಎಂದು ಅವರು ಹೇಳಿದ್ದಾರೆ.
ಹಿಡಕಲ್ ಜಲಾಶಯದಿಂದ ಈಗ ಕೃಷಿ ಭೂಮಿಗೆ ಹರಿಸುತ್ತಿರುವ ನೀರಿನ ಪ್ರಮಾಣ ಅಬಾಧಿತವಾಗಿ ಇರಲಿದೆ. ಕುಡಿಯುವ ನೀರಿಗೂ ತೊಂದರೆ ಆಗುವುದಿಲ್ಲ. ಯೋಜನೆಯ ವಿರುದ್ಧ ಮಾತನಾಡುತ್ತಿರುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ.