ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ : ಡಾ.ಹರೀಶ್ ಕುಮಾರ್
ಮಾಹಿತಿ ಹಕ್ಕು ಕಾಯಿದೆ ಯಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು.
ಅವರು ಶನಿವಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಹಿತಿ ಹಕ್ಕು ಕಾಯಿದೆಯು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಕಾನೂನಾತ್ಮಕವಾಗಿ ಸಾರ್ವಜನಿಕ ಕೆಲಸಗಳನ್ನು ಮಾಡಲು ಸಹಕಾರಿಯಾಗಿದ್ದು,ಇದು ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಣೆ ಮಾಡುವ ಕಾಯಿದೆಯಾಗಿ ಬದಲಾಗಿದೆ , ಅಧಿಕಾರಿಗಳು ಪ್ರಾಮಾಣಿಕವಾಗಿ ತಪ್ಪುಗಳನ್ನು ಮಾಡದಂತೆ ಕೆಲಸ ನಿರ್ವಹಿಸಲು ಕಾಯ್ದೆ ಸಹಕಾರಿಯಾಗಿದೆ ಎಂದರು.
ಕಾಯಿದೆಯ ಕುರಿತಂತೆ ಅಗಿಂದಾಗ್ಗೆ ಸರ್ವೋಚ್ಚ ನ್ಯಾಯಾಲಯ, ಹೈಕೋರ್ಟ್ ನೀಡುವ ತೀರ್ಪುಗಳ ಕುರಿತಂತೆ ಮಾಹಿತಿ ಅಧಿಕಾರಿಗಳು ಅರಿವು ಹೊಂದಿರಬೇಕು, ಕಾಯಿದೆಯಲ್ಲಿನ ಎಲ್ಲಾ ಅಂಶಗಳ ಬಗ್ಗೆ ಸಮಗ್ರವಾಗಿ ಅರಿತುಕೊಂಡು ಸಾರ್ವಜನಿಕರಿಗೆ ಮಾಹಿತಿಗಳನ್ನು ಒದಗಿಸಬೇಕು. ಪ್ರಥಮ ಮೇಲ್ಮನವಿ ಮತ್ತು ಎರಡನೇ ಮೆಲ್ಮನವಿಗಳ ಸಲ್ಲಿಕೆಗೆ ಅವಕಾಶ ನೀಡದೇ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇಗೊಳಿಸಬೇಕು. ನಿಗಧಿತ ಅವಧಿಯೊಳಗೆ ಮಾಹಿತಿ ಒದಗಿಸದ ಅಧಿಕಾರಿಗಳಿಗೆ ರೂ.25000 ಗಳವರೆಗೆ ದಂಡ ಮತ್ತು ಕರ್ತವ್ಯ ಲೋಪದಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡುವ ಅಧಿಕಾರ ಆಯೋಗಕ್ಕಿದೆ ಎಂದರು.







Comments
Leave a Comment