ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ
ಬೆಂಗಳೂರು- ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬಜೆಟ್ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಆಗುವುದು ವಿಳಂಬವಾಗಿದ್ದರಿಂದ ಸಹಾಯಧನ ಪಾವತಿಗೆ ತಡವಾಗಿದೆ. ಈ ಸಂಬಂಧ ಸಮಿತಿ ಸಭೆಗಳನ್ನು ತುರ್ತಾಗಿ ನಡೆಸಿ, ಶಾಸಕರನ್ನು ಖುದ್ದಾಗಿ ಭೇಟಿ ಮಾಡಿ ಆಯ್ಕೆ ಸಮಿತಿ ಸಭೆಯನ್ನು ನಡೆಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ವರ್ಷದ ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಉದ್ಯೋಗಿನಿ ಯೋಜನೆಯನ್ನು ಜಾರಿಗೆ ತಂದಿರುವುದೇ ಮಹಿಳಾ ಸಬಲೀಕರಣಕ್ಕಾಗಿ. ಜೊತೆಗೆ ಗೃಹಲಕ್ಷ್ಮೀ, ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಉದ್ಯೋಗಿನಿ ಯೋಜನೆಯ ಸಹಾಯಧನ ತಲುಪಲು ಬ್ಯಾಂಕ್ಗಳು ಕೂಡ ಸರಿಯಾಗಿ ಸಹಕರಿಸುತ್ತಿಲ್ಲ. ಶಾಸಕರು ಆಯ್ಕೆ ಮಾಡಿದ ಫಲಾನುಭವಿಗಳಲ್ಲಿ ಸಿಬಿಲ್ ಸ್ಕೋರ್ ಆಧಾರದ ಮೇಲೆ ಬ್ಯಾಂಕ್ಗಳೂ ಫಲಾನುಭವಿಗಳನ್ನು ಆಯ್ಕೆ ಮಾಡಲು ವಿಳಂಬ ಮಾಡುತ್ತಿವೆ. ಈ ಕುರಿತು ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಬ್ಯಾಂಕ್ಸ್ (SLBC) ಕಮಿಟಿಯಲ್ಲಿ ಈ ಸಂಬಂಧ ಸಾಲ ಮಂಜೂರಾತಿಯನ್ನು ತುರ್ತಾಗಿ ಕ್ರಮವಹಿಸಲು ತಿಳಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.





Comments
Leave a Comment