ಈಡಿಗ-ಬಿಲ್ಲವ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು – ಸತ್ಯಜಿತ್ ಸುರತ್ಕಲ್ ಆಗ್ರಹ
From Jayaram Udupi
ಮಂಗಳೂರು:
ರಾಜ್ಯದಲ್ಲಿ ಈಡಿಗ-ಬಿಲ್ಲವ ಸೇರಿದಂತೆ 26 ಪಂಗಡಗಳ ಪ್ರತಿನಿಧಿತ್ವ ಹೊಂದಿರುವ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ನಮ್ಮ ಸಮಾಜವು ದೇಶಕ್ಕೆ ಹಣಕಾಸು ಸಚಿವರು, ರಾಜ್ಯಕ್ಕೆ ಮುಖ್ಯಮಂತ್ರಿಗಳು ಹಾಗೂ ಅನೇಕ ಸಚಿವರನ್ನು ನೀಡಿದ ಹೆಗ್ಗಳಿಕೆಯನ್ನು ಹೊಂದಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕನಿಷ್ಠ ಇಬ್ಬರು ಸಚಿವರು ನಮ್ಮ ಸಮಾಜವನ್ನು ಪ್ರತಿನಿಧಿಸುತ್ತಿದ್ದರು. ಆದರೆ, 2023ರಲ್ಲಿ ಅಧಿಕಾರಕ್ಕೆ ಬಂದ ಪ್ರಸ್ತುತ ಸರ್ಕಾರದಲ್ಲಿ ಸಚಿವ ಸಂಪುಟದಲ್ಲಿನ ನಮ್ಮ ಸಮಾಜದ ಪ್ರತಿನಿಧಿತ್ವ ಕೇವಲ ಒಬ್ಬ ಸಚಿವರಿಗೆ ಸೀಮಿತವಾಗಿದೆ" ಎಂದು ಹೇಳಿದರು.
ಉಳಿದಿರುವ ಸುಮಾರು ಒಂದೂವರೆ ವರ್ಷದ ಸರ್ಕಾರದ ಅವಧಿಯಲ್ಲಿ ಮತ್ತೊಬ್ಬರಿಗೆ ಸಚಿವ ಸ್ಥಾನ ನೀಡಿ, ಸಮಾಜಕ್ಕೆ ಕನಿಷ್ಠ ಇಬ್ಬರು ಸಚಿವರ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಹಾಗೂ ನೂತನ ಕೆಪಿಸಿಸಿ ಅಧ್ಯಕ್ಷರಲ್ಲಿ ಮನವಿ ಮಾಡಿದರು.
ಚುನಾವಣಾ ಸಂದರ್ಭದಲ್ಲಿ ಈಡಿಗ-ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಚಿಸಲಾಗಿರುವ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ವಾರ್ಷಿಕ 500 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಕಳೆದ ಮೂರು ವರ್ಷಗಳಲ್ಲಿ ನಿಗಮದ ರಚನೆ, ಅಧ್ಯಕ್ಷರ ನೇಮಕ ಹಾಗೂ ಕಚೇರಿ ಸ್ಥಾಪನೆ ಮಾತ್ರ ನಡೆದಿದ್ದು, ಯಾವುದೇ ಅನುದಾನ ಬಿಡುಗಡೆ ಆಗಿಲ್ಲ ಎಂದು ಅವರು ಆರೋಪಿಸಿದರು.
ಭರವಸೆಯಂತೆ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಒಟ್ಟು 1,500 ಕೋಟಿ ರೂ. ಅನುದಾನ ದೊರೆಯಬೇಕಾಗಿದ್ದರೂ ಅದು ಸಿಕ್ಕಿಲ್ಲ. ಇದರಿಂದ ಸಮಾಜದ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಅವರು ಹೇಳಿದರು.
ಮುಂದಿನ ಆರು ತಿಂಗಳೊಳಗೆ ಸರ್ಕಾರ ನಿಗಮಕ್ಕೆ ಅನುದಾನ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಹಾಗೂ ಪ್ರತಿಭಟನಾ ಸಭೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಪದಾಧಿಕಾರಿಗಳಾದ ಸಂದೀಪ್ ಪಂಪ್ವೆಲ್, ಎಂ.ಕೆ. ಪ್ರಸಾದ್, ದಿನೇಶ್ ಕುಮಾರ್ ರೈ, ಲಕ್ಷ್ಮೀಶ್ ಸುವರ್ಣ, ನವೀನ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.



Comments
Leave a Comment