ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು : ಮಾಜಿ ಸಚಿವ ಬಿ. ರಮಾನಾಥ ರೈ
From Jayaram Udupi
ಮಂಗಳೂರು:
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆಗ್ರಹಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ವಿದ್ಯಾವಂತರು ಹಾಗೂ ಜಾಗೃತ ಮತದಾರರನ್ನು ಹೊಂದಿರುವ ಜಿಲ್ಲೆಯಾಗಿದ್ದು, ಮತದಾನವು ಪ್ರತಿಯೊಬ್ಬ ಪ್ರಜೆಯ ಸಾಂವಿಧಾನಿಕ ಹಕ್ಕಾಗಿದೆ. ಆದ್ದರಿಂದ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಲ್ಲಾ ಹಂತದ ಮುಖಂಡರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಬೂತ್ ಲೆವೆಲ್ ಏಜೆಂಟ್ಗಳಿಗೆ (ಬಿಎಲ್ಎ) ಅಗತ್ಯ ತರಬೇತಿ ಮತ್ತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ 249 ಮತಗಟ್ಟೆಗಳಿಗೂ ಕಾಂಗ್ರೆಸ್ ಪಕ್ಷದ ಬೂತ್ ಲೆವೆಲ್ ಏಜೆಂಟ್ಗಳನ್ನು ನೇಮಕ ಮಾಡಲಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಅರ್ಹ ಮತದಾರರಿಗೆ ಅಗತ್ಯ ನೆರವು ನೀಡುವಂತೆ ಅವರಿಗೆ ಸೂಚಿಸಲಾಗಿದೆ ಎಂದರು.
ಬೂತ್ ಲೆವೆಲ್ ಅಧಿಕಾರಿಗಳು (ಬಿಎಲ್ಒ) ಹಾಗೂ ಬೂತ್ ಲೆವೆಲ್ ಏಜೆಂಟ್ಗಳಿಗೆ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ತರಬೇತಿ ನೀಡಲಾಗುತ್ತಿದ್ದು, ಎಸ್ಐಆರ್ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.
ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ತಿದ್ದುಪಡಿ ಪ್ರಕ್ರಿಯೆ ಆನ್ಲೈನ್ನಲ್ಲಿಯೂ ಲಭ್ಯವಿರುವುದರಿಂದ, ಸಾರ್ವಜನಿಕರು ಯಾವುದೇ ಗೊಂದಲ ಅಥವಾ ಸುಳ್ಳು ಪ್ರಚಾರಕ್ಕೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಅವರು ಮನವಿ ಮಾಡಿದರು.
ಕೆಲವು ರಾಜಕೀಯ ನಾಯಕರು ಎಸ್ಐಆರ್ ಕುರಿತು ಆಧಾರರಹಿತ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಮತದಾರರ ಪಟ್ಟಿಯನ್ನು ರಾಜಕೀಯ ಅಥವಾ ಧಾರ್ಮಿಕ ದೃಷ್ಟಿಕೋನದಿಂದ ನೋಡುವ ಬದಲು, ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ಬಿಎಲ್ಒಗಳು ಯಾವುದೇ ಒತ್ತಡಕ್ಕೆ ಮಣಿಯದೆ ಪಕ್ಷಾತೀತವಾಗಿ ಕಾರ್ಯನಿರ್ವಹಿಸಿ, ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಎಚ್ಚರ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಶಿಧರ್ ಹೆಗ್ಡೆ, ಬೇಬಿ ಕುಂದರ್, ಪ್ರಕಾಶ್ ಸಾಲಿಯಾನ್, ಬಿ.ಎಲ್. ಪದ್ಮನಾಭ, ಹರಿನಾಥ್ ಕೆ., ಜೋಕಿಂ ಡಿ'ಸೋಜಾ, ಪದ್ಮಪ್ರಸಾದ್ ಜೈನ್ , ಮಂಜುಳಾ ನಾಯಕ್, ವಿಕಾಸ್ ಶೆಟ್ಟಿ, ದಿನೇಶ್ ಮುಳೂರು, ಸುಹಾನ್ ಆಳ್ವಾ, ಶುಭೋದಯ ಆಳ್ವಾ, ಗೀತಾ ಅತ್ತಾವರ, ಸಚಿನ್ ಶೆಟ್ಟಿ ಸುಳ್ಯ ಹಾಗೂ ಸಬೀರ್ ಎಸ್ ಸಹಿತ ಮತ್ತಿತ್ತರರು ಉಪಸ್ಥಿತರಿದ್ದರು .



Comments
Leave a Comment