PRABHAVAA.COM

ಜಮೀರ್ ದೇಶಪ್ರೇಮ ಪ್ರಶ್ನಿಸುವ ಅಗತ್ಯವಿಲ್ಲ: ಸಚಿವ ಯು.ಟಿ. ಖಾದರ್

Dakshina Kannada:

Font size:

ಹಿಂದಿನವರ ತ್ಯಾಗದಿಂದಲೇ ಇಂದಿನ ಸ್ವಾತಂತ್ರ್ಯ: ಖಾದರ್

From Jayram Udupi

ಮಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ಅವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುವ ವಿಚಾರವನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಸ್ ಖಾತೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಪ್ರೀತಿ, ವಿಶ್ವಾಸ, ಸೌಹಾರ್ದತೆ ಮತ್ತು ಒಗ್ಗಟ್ಟಿನಿಂದ ಒಬ್ಬರಿಗೊಬ್ಬರು ಸಹಕರಿಸಿ ಅಭಿವೃದ್ಧಿ ಹೊಂದಿದ ಕರ್ನಾಟಕ, ಉತ್ತಮ ಸಮಾಜ ಹಾಗೂ ಬಲಿಷ್ಠ ಭಾರತ ನಿರ್ಮಾಣ ಮಾಡುವುದು ನಮ್ಮ ಕನಸಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು,” ಎಂದರು.

ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಆಗ್ರಹದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯು.ಟಿ. ಖಾದರ್, “ಎಲ್ಲರೂ ಒಗ್ಗಟ್ಟಿನಲ್ಲಿ ಇರಬೇಕು ಎಂಬುದೇ ನನ್ನ ಉತ್ತರ. ಇಂತಹ ವಿಚಾರಗಳನ್ನು ಅರ್ಥಮಾಡಿಕೊಂಡು ಮುನ್ನಡೆಯಬೇಕು,” ಎಂದು ಹೇಳಿದರು.

ಜಮೀರ್ ಅಹಮದ್ ಖಾನ್ ಅವರು ದೇಶಪ್ರೇಮಿಯಾಗಿದ್ದು, ಎಲ್ಲ ಸಂದರ್ಭಗಳಲ್ಲೂ ಸೌಹಾರ್ದತೆ ಹಾಗೂ ದೇಶಪ್ರೇಮವನ್ನು ಪ್ರದರ್ಶಿಸಿಕೊಂಡು ಬಂದಿದ್ದಾರೆ. ಕೆಲವೊಂದು ಕಾರಣಗಳಿಂದ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸುವ ಸಂದರ್ಭದಲ್ಲಿ ಅವರ ಪತ್ರದಲ್ಲಿನ ಕೆಲವು ಪದಗಳು ಹೆಚ್ಚು-ಕಡಿಮೆಯಾಗಿರಬಹುದು. ಬಹುಶಃ ಆ ಭಾವನೆಯಲ್ಲಿ ಅವರು ಹಾಗೆ ಹೇಳಿರಬಹುದು. ಆದರೆ ಅವರ ನಿಜವಾದ ಉದ್ದೇಶ ಅದಾಗಿರಲಿಲ್ಲ ಎಂದು ಯು.ಟಿ. ಖಾದರ್ ಸಮರ್ಥಿಸಿಕೊಂಡರು.

“ಕೆಲವು ಕಾರಣಗಳಿಂದ ಇಂದು ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುವುದಿಲ್ಲ ಎಂಬುದು ಅವರ ವಿಚಾರವಾಗಿತ್ತು. ಅದನ್ನು ಅಪಾರ್ಥ ಮಾಡಿಕೊಂಡು ರಾಜಕೀಯಗೊಳಿಸುವುದು ಸರಿಯಲ್ಲ. ರಾಜಕೀಯ ಮಾಡುವುದಕ್ಕಾಗಿ ಇಂತಹ ವಿಚಾರಗಳನ್ನು ಬಳಸಿಕೊಳ್ಳಬಾರದು,” ಎಂದು ಅವರು ಹೇಳಿದರು.

ಸರ್ಕಾರ ಜಮೀರ್ ಅಹಮದ್ ಖಾನ್ ಅವರ ಮನವಿಯನ್ನು ಸ್ವೀಕರಿಸಿ, ಅವರ ಬದಲಿಗೆ ಮತ್ತೊಬ್ಬರನ್ನು ಕಾರ್ಯಕ್ರಮಕ್ಕೆ ನಿಯೋಜಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ನಿಗದಿಯಂತೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅಲ್ಲಿಗೆ ತೆರಳಲು ಸಾಧ್ಯವಾಗದ ಕಾರಣ, ಅವರ ಪತ್ರವನ್ನು ಆಧಾರವಾಗಿಟ್ಟುಕೊಂಡು ಬೇರೊಬ್ಬರನ್ನು ನಿಯೋಜಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪತ್ರದಲ್ಲಿನ ಕೆಲವು ಪದಗಳನ್ನು ಹಿಡಿದುಕೊಂಡು ರಾಜಕೀಯ ಮಾಡುವುದು ಸರಿಯಲ್ಲ,” ಎಂದರು.

ದೇಶದ ಪ್ರತಿಯೊಬ್ಬರಲ್ಲೂ ದೇಶಪ್ರೇಮವಿದೆ. ಸಮಾಜಕ್ಕೆ ಎಲ್ಲರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜಮೀರ್ ಅಹಮದ್ ಖಾನ್ ಅವರ ದೇಶಪ್ರೇಮವನ್ನು ಪ್ರಶ್ನಿಸುವ ಅಗತ್ಯವಿಲ್ಲ ಎಂದು ಯು.ಟಿ. ಖಾದರ್ ಸ್ಪಷ್ಟಪಡಿಸಿದರು.

ಹಿಂದಿನವರ ತ್ಯಾಗದಿಂದಲೇ ಇಂದಿನ ಸ್ವಾತಂತ್ರ್ಯ: ಖಾದರ್

ಮಂಗಳೂರು: ಸ್ವಾತಂತ್ರ್ಯಕ್ಕಾಗಿ ಹಿಂದಿನ ಪೀಳಿಗೆ ತಮ್ಮ ಜೀವನವನ್ನೇ ತ್ಯಾಗ ಮಾಡಿ ಇತಿಹಾಸ ಸೃಷ್ಟಿಸಿದೆ. ಭಾರತವನ್ನು ವಿಶ್ವದ ಉನ್ನತ ಸ್ಥಾನಕ್ಕೇರಿಸಲು ಇಂದಿನ ಪೀಳಿಗೆ ಶ್ರಮಿಸಿ ಹೊಸ ಇತಿಹಾಸ ನಿರ್ಮಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.

ನಗರದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ಕೇವಲ ಸಂಭ್ರಮದ ದಿನವಲ್ಲ. ದೇಶದ ಸ್ವಾತಂತ್ರ್ಯವನ್ನು ಕಾಪಾಡುವ ಸಂಕಲ್ಪ ತೊಡುವ ದಿನವೂ ಆಗಿದೆ. ಗಾಂಧೀಜಿ, ನೆಹರು, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು ಎಂದರು.

ವಿವಿಧ ಭಾಷೆ, ಸಂಸ್ಕೃತಿ ಹಾಗೂ ಧರ್ಮಗಳ ನಡುವೆಯೂ ಭಾರತೀಯತೆ ನಮ್ಮನ್ನು ಒಗ್ಗೂಡಿಸಿದೆ. ಸರ್ವಧರ್ಮ ಸೌಹಾರ್ದತೆ, ಶಾಂತಿ ಹಾಗೂ ದೇಶದ ಏಕತೆಯನ್ನು ಕಾಪಾಡುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ 3.82 ಲಕ್ಷ ಮಹಿಳೆಯರಿಗೆ ₹2,001 ಕೋಟಿ, ಯುವನಿಧಿಯಡಿ 7,542 ಯುವಕ-ಯುವತಿಯರಿಗೆ ₹21 ಕೋಟಿ ನೆರವು ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 5.52 ಲಕ್ಷ ಫಲಾನುಭವಿಗಳು ಹಾಗೂ ಶಕ್ತಿ ಯೋಜನೆಯಡಿ 14 ಕೋಟಿ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಆರೋಗ್ಯ, ವಿದ್ಯುತ್, ಕುಡಿಯುವ ನೀರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಮಂಗಳೂರು ಮತ್ತು ಉಳ್ಳಾಲದಲ್ಲಿ ಭೂಗತ ವಿದ್ಯುತ್ ಕೇಬಲ್ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜೊತೆಗೆ ಡ್ರಗ್ಸ್ ಜಾಲ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆ ಹೊಂದಿದೆ ಎಂದು ಯು.ಟಿ. ಖಾದರ್ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ'ಸೋಜಾ, ಎಸ್.ಎಲ್. ಭೋಜೇಗೌಡ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ಜನಪ್ರತಿನಿಧಿಗಳು, ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಯುವ ಕರ್ನಾಟಕ–ನವ ಭಾರತ: ಅಭಿವೃದ್ಧಿಯ ತೇರನ್ನು ಎಳೆಯಲು ಕನ್ನಡದ ಕುಲಕೋಟಿ ಕೈಜೋಡಿಸಿ: ಸಿಎಂ ಡಿ ಕೆ ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News