ಅಕ್ಟೋಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಿ, ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಎಂ ಡಾ.ಜಿ.ಪರಮೇಶ್ವರ
ಬೆಂಗಳೂರು, ಆಗಸ್ಟ್ 27 : ಇಂದು ವಿಕಾಸಸೌಧದಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ 4 ಯೋಜನೆಗಳಿಗೆ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸುವ ಕರಪತ್ರಗಳನ್ನು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಬಿಡುಗಡೆಗೊಳಿಸಿದರು.
ಆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಆರ್ಯ ವೈಶ್ಯ ಸಮುದಾಯದವರಿಗೆ ಶಿಕ್ಷಣ, ಸ್ವಯಂ ಉದ್ಯೋಗ, ಕೃಷಿಗೆ ಮತ್ತು ಆಹಾರ ತಯಾರಿಕೆಗೆ ಸಂಬಂಧಪಟ್ಟ ಯೋಜನೆಗಳನ್ನು ರೂಪಿಸಿ, ಆರ್ಯ ವೈಶ್ಯ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ʼಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಿರುವುದಾಗಿ ತಿಳಿಸಿದರು.
ಕಳೆದ 7 ವರ್ಷಗಳಿಂದ ನಿಗಮಕ್ಕೆ ಬಿಡುಗಡೆಯಾದ ಅನುದಾನ ಹಾಗೂ ಮರುಪಾವತಿ ಮೊತ್ತ ಸೇರಿಸಿ ಒಟ್ಟು ₹85 ಕೋಟಿಗಳಲ್ಲಿ 16,785 ಫಲಾನುಭವಿಗಳಿಗೆ ಸಾಲ - ಸಬ್ಸಿಡಿ ಮತ್ತು ಶುಲ್ಕ ಮರುಪಾವತಿ ನೀಡಿ ಶೇ.96ರಷ್ಟು ಪ್ರಗತಿ ಸಾಧಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಮುಂದುವರೆದು, ₹11 ಕೋಟಿ ಸಾಲ ಮರುಪಾವತಿಯನ್ನು ಪಡೆಯುವಲ್ಲಿ ನಿಗಮವು ಯಶಸ್ವಿಯಾಗಿರುತ್ತದೆ ಹಾಗೂ 740 ಫಲಾನುಭವಿಗಳು ಪೂರ್ಣಪ್ರಮಾಣದಲ್ಲಿ ಸಾಲ ಮರುಪಾವತಿ ಮಾಡಿರುವುದು ಈ ನಿಗಮದ ವಿಶಿಷ್ಟ ಸಾಧನೆಯಾಗಿದೆ ಎಂದರು.
2026-27ನೇ ಸಾಲಿಗೆ ಎಲ್ಲಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್ 15ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆರ್ಯ ವೈಶ್ಯ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಡಿಸಿಎಂ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಿಗಮದ ಅಧ್ಯಕ್ಷರಾದ ಕೆ.ವಿ.ರಾಮ್ ಪ್ರಸಾದ್, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾದ ದೀಪಶ್ರೀ ಕೆ. ಉಪಸ್ಥಿತರಿದ್ದರು.






Comments
Leave a Comment