ಮಂಗಳೂರು ಬಂದರು: ಮೀನುಗಾರಿಕೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ – ಡ್ರೆಡ್ಜಿಂಗ್, ಮೂಲಸೌಕರ್ಯ, ₹32 ಸಾವಿರ ಕೋಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧತೆ
From Jayaram Udupi
ಮಂಗಳೂರು:/
ಮೀನುಗಾರಿಕೆ ಕ್ಷೇತ್ರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು
ಮೀನುಗಾರಿಕಾ ಸಂಘಟನೆಗಳ ಪ್ರತಿನಿಧಿಗಳು ಹಲವು ಬೇಡಿಕೆಗಳನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದೇನೆ. ಮೀನುಗಾರಿಕಾ ಚಟುವಟಿಕೆಗಳಿಗೆ ಯಾವುದೇ ರೀತಿಯ ಅಡ್ಡಿಯಾಗಬಾರದು. ಅಧಿಕಾರಿಗಳು ಅಥವಾ ಇತರರು ವ್ಯವಹಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದು ಕಂಡುಬಂದರೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಜೆಟ್ಟಿ ಪ್ರದೇಶದಲ್ಲಿ ಅಕ್ರಮವಾಗಿ ರಸ್ತೆ ಬಂದ್ ಮಾಡಿರುವುದು, ಅನುಮತಿ ಇಲ್ಲದೆ ಕಾಂಪೌಂಡ್ ನಿರ್ಮಿಸಿರುವುದು ಸೇರಿದಂತೆ ಹಲವು ವಿಷಯಗಳು ಗಮನಕ್ಕೆ ಬಂದಿವೆ. ಸರ್ಕಾರಿ ಆಸ್ತಿಗಳನ್ನು ಅಗತ್ಯವಿದ್ದಲ್ಲಿ ವಶಕ್ಕೆ ಪಡೆದು ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಖಾಸಗಿ ಜಾಗದ ಸಮಸ್ಯೆ ಇದ್ದಲ್ಲಿ ದಾಖಲೆ ಪರಿಶೀಲಿಸಿ ಸ್ವಾಧೀನ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು.
ಅಳಿವೆ ಬಾಗಿಲಿನಲ್ಲಿ ದೀರ್ಘಕಾಲದಿಂದ ಡ್ರೆಡ್ಜಿಂಗ್ ನಡೆಯದಿರುವುದು ಗಂಭೀರ ಸಮಸ್ಯೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ. ಡ್ರೆಡ್ಜಿಂಗ್ ಮೂಲಕ ತೆಗೆದ ಮಣ್ಣನ್ನು ಸಮುದ್ರಕ್ಕೆ ಬಿಡಬೇಕೇ ಅಥವಾ ಅದನ್ನು ಬಳಸಿಕೊಂಡು ಭೂಭಾಗ ವಿಸ್ತರಿಸಬೇಕೇ ಎಂಬುದರ ಕುರಿತು ತಾಂತ್ರಿಕ ಸಮಿತಿಯ ಸಲಹೆ ಪಡೆಯಲಾಗುವುದು. ಕೇಂದ್ರದ ತಾಂತ್ರಿಕ ಸಮಿತಿಯನ್ನೂ ಈ ಕುರಿತು ಪರಿಶೀಲನೆ ನಡೆಸುವಂತೆ ಕೇಳಲಾಗುವುದು ಎಂದು ತಿಳಿಸಿದರು.
ಸಾಗರಮಾಲಾ ಯೋಜನೆಯಡಿ ಡ್ರೆಡ್ಜಿಂಗ್ಗೆ ಮೀಸಲಿಟ್ಟಿರುವ ಅನುದಾನ ಬಳಕೆಯಾಗದಿರುವ ಕುರಿತು ಪರಿಶೀಲನೆ ನಡೆಸಲಾಗುವುದು. ಅಗತ್ಯವಿದ್ದರೆ ಸರ್ಕಾರವೇ ಡ್ರೆಜ್ಜರ್ ಲೀಸ್ಗೆ ಪಡೆಯಬೇಕೇ ಅಥವಾ ಸ್ವಂತ ಡ್ರೆಜ್ಜರ್ ಖರೀದಿಸಬೇಕೇ ಎಂಬುದನ್ನು ಶೀಘ್ರದಲ್ಲೇ ತೀರ್ಮಾನಿಸಲಾಗುವುದು ಎಂದರು.
ಮೀನುಗಾರ ಮಹಿಳೆಯರ ಮೂಲಸೌಕರ್ಯ ಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಮುಖ್ಯಮಂತ್ರಿ ಹೇಳಿದರು. ಜೆಟ್ಟಿಯಲ್ಲಿ ಶೌಚಾಲಯ, ಆರೋಗ್ಯ ತಪಾಸಣೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ತುರ್ತು ಸಂದರ್ಭಗಳಲ್ಲಿ ನೆರವಾಗಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಕರಾವಳಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಘೋಷಿಸಿರುವ ₹32 ಸಾವಿರ ಕೋಟಿ ಮೊತ್ತದ ಯೋಜನೆಗಳ ಕುರಿತು ಮಾತನಾಡಿದ ಅವರು, ಇದರಲ್ಲಿ ಸುಮಾರು ₹16 ಸಾವಿರ ಕೋಟಿ ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದೆ. ಸರ್ಕಾರ ಘೋಷಿಸಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ನೀಡಿದ ಮಾತಿನಂತೆ ನಡೆದುಕೊಳ್ಳುವುದು ತಮ್ಮ ಸರ್ಕಾರದ ಶಕ್ತಿ ಎಂದು ಹೇಳಿದರು.
ಸಚಿವರಾದ ಯು ಟಿ ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಟ್ರಾಲ್ ಬೋಟ್ ಮೀನುಗಾರರ ಸಂಘದ ಮಾಜಿ ಅಧ್ಯಕ್ಷರಾದ ಚೇತನ್ ಬೆಂಗ್ರೆ, ಮೋಹನ್ ಬೆಂಗ್ರೆ ಮತ್ತಿತರರ ಸ್ಥಳೀಯ ಮುಖಂಡರು ಇದ್ದರು







Comments
Leave a Comment